Sunday, May 25, 2025

ಶಬ್ದಪಾರಮಾರ್ಗಮಶಕ್ಯಂ


ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕ ಏಕೀಕರಣ ಒಂದು ಮಹತ್ವಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡದ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ. ಕರ್ನಾಟಕತ್ವದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.


ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನಾವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಾಗಿದೆ. ಅಂದರೆ : ದೇಸಿ ಬೇರುಗಳ ಗುರುತಿಸುವಿಕೆ ಕನ್ನಡ ಅಧ್ಯಯನದ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆ ಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.


ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ತೊಡಗಿಸಿಕೊಂಡ ಈ ವಿದ್ವತ್ಕ್ಷೇತ್ರದಲ್ಲಿ ಮುಂದಿನ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳುತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಲ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯ ವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆ ಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.


ನಮ್ಮೆದುರು ನುಗ್ಗಿ ಬರುತ್ತಿರುವ ಜಾಗತೀಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞಾನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯ ನೆಲೆಯಲ್ಲಿ ವಿಶ್ಲೇಷಿಸ ಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲ ಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆ ಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಾಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ : ಕನ್ನಡದ ಅರಿವಿನ ವಿಕೇಂದ್ರೀಕರಣವೇ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.


ಬಸವತತ್ವ ಒಂದು ಜೀವನಕ್ರಮ. ಸಮಾಜದ ಮೇಲೆ ಅದರ ಪ್ರಭಾವ ಅಪಾರ. ಕನ್ನಡ ಸಂಸ್ಕೃತಿಯ ಬಯಲಲ್ಲೆಲ್ಲ ಬಸವತತ್ವ ಅಖಂಡವಾಗಿ ಹಬ್ಬಿದೆ. ನಿರಂತರವಾಗಿ ಸಮಾಜವನ್ನು ಹಿಡಿದಿಟ್ಟುಕೊಂಡಿರುವ ಈ ತತ್ವವು ಯಾವತ್ತೂ ಆರೋಗ್ಯಪೂರ್ಣ ಸಮಾಜಕ್ಕೆ ಬೇಕು. ಈ ನಿಟ್ಟಿನಲ್ಲಿ ನಿರಂತರವಾಗಿ ಬಸವತತ್ವದ ಜೊತೆ ಬೌದ್ದಿಕವಾಗಿ ಅನುಸಂಧಾನ ಮಾಡುವುದು ಉಚಿತವಾಗಿದೆ. ಬಸವತತ್ವವನ್ನು ವಿಸ್ತಾರ ದೃಷ್ಟಿಯಿಂದ ವಿಶ್ಲೇಷಿಸುವ ಹಾಗೆಯೇ ವರ್ತಮಾನದ ಸಮಾಜದ ನಿರೀಕ್ಷೆಗಳಿಂದ ಪರಂಪರೆಯನ್ನು ಅಳೆಯುವ ಚಿಂತಕ ನೋಟವೂ ಇಲ್ಲಿ ಸಂಗಮಿಸಿದೆ. ತಳಸಮುದಾಯಗಳ ಲೋಕದೃಷ್ಟಿಯಿಂದಲೂ ಬಸವತತ್ವವನ್ನು ಪರಾಮರ್ಶಿಸುವ ರೀತಿಯೂ ಸಾಧ್ಯವಾಗಿದೆ. ಶ್ರೀ ಮಹೇಶ ತಿಪ್ಪಶೆಟ್ಟಿ ಅವರು ಈ ಕಾರ್ಯವನ್ನು ಅರ್ಥಪೂರ್ಣವಾಗಿ ವಿವಿಧ ನೆಲೆಯ ವಿದ್ವಾಂಸರ ಆಲೋಚನೆಗಳನ್ನು ಒಂದೆಡೆ ಬೆಸೆದು ಕೃತಿ ರೂಪಕ್ಕೆ ತಂದಿರುವುದು ಉಪಯುಕ್ತವಾಗಿದೆ. ಇಂತಹ ಉತ್ತಮ ಕೃತಿಯೊಂದನ್ನು ಸಂಪಾದಿಸಿಕೊಟ್ಟ ಮಹೇಶ ತಿಪ್ಪಶೆಟ್ಟಿ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಪರವಾಗಿ ಅಭಿನಂದನೆಗಳು.


ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನಮೂರ್ತಿ ಅವರಿಗೆ ಅಭಿನಂದನೆಗಳು.